ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳಿಗೆ ನಾಗರಹೊಳೆಯ ವೀರನ ಹೊಸಹಳ್ಳಿ ಗೇಟ್ ಬಳಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ವೇಳೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಚಾಮರಾಜನಗರ ಸಂಸದ ಸುನೀಲ್ ಬೋಸ್, ಶಾಸಕರಾದ ಡಿ.ರವಿಶಂಕರ್, ಹರೀಶ್ ಗೌಡ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೊದಲ ಹಂತದಲ್ಲಿ ಒಟ್ಟು 9 ಆನೆಗಳ ಪಯಣ ಆರಂಭವಾಗಿದೆ. ಎರಡನೇ ಹಂತದಲ್ಲಿ 5 ಆನೆಗಳು ಪ್ರಯಾಣ ಆರಂಭಿಸಲಿವೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ.
ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದಲ್ಲಿ ಕಂಜನ್, ಏಕಲವ್ಯ, ಭೀಮ, ಲಕ್ಷ್ಮಿ, ವರಲಕ್ಷ್ಮಿ, ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿನ ಅರಣ್ಯ ಭವನಕ್ಕೆ ಇದೇ 23ರಂದು ಆಗಮಿಸಲಿದ್ದು, ಆನೆಗಳನ್ನು ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸುದ್ದಿಗಾರರೊಂದಿಗೆ ಡಾ. ಎಚ್.ಸಿ.ಮಹದೇವಪ್ಪ, ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆ ಮತ್ತು ಅದ್ಧೂರಿಯಾಗಿ ಆಚರಿಸಲಾಗುವುದು. ಅಭಿಮನ್ಯು ನೇತೃತ್ವದಲ್ಲಿ ಒಟ್ಟು 14 ಆನೆಗಳು ದಸರಾದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಆನೆ ಕಾಡಿನ ಸಂಪತ್ತು. ವನ್ಯಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡುವುದು ಅತ್ಯಗತ್ಯ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯದ ಜನರು ಐದು ವರ್ಷ ಆಡಳಿತ ನಡೆಸಲು ಅಧಿಕಾರ ನೀಡಿದ್ದಾರೆ. ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಲಿದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.
ಈಶ್ವರ್ ಖಂಡ್ರೆ, ಗಜಪಡೆಗೆ ಚಾಲನೆ ನೀಡಲಾಗಿದೆ. ಕಳೆದ ವರ್ಷ ನಿಶಾನೆ ಆನೆಯಾಗಿ ಅರ್ಜುನ ಮುನ್ನಡೆಸಿದ್ದ. ಆನೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರ್ಜುನ ಮೃತಪಟ್ಟಿದ್ದ. ಈ ವರ್ಷ ಅಭಿಮನ್ಯು ಅಂಬಾರಿ ಹೊರಲಿದ್ದಾನೆ ಎಂದರು.
ಮೃತಪಟ್ಟ ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳು ಮತ್ತು ಮಾವುತರಿಗೆ ವಿಮೆ ಮಾಡುವ ಕುರಿತು ಮಾಹಿತಿ ಕಲೆ ಹಾಕಲಾಗುವುದು ಎಂದು ಅವರು ತಿಳಿಸಿದರು.
#LiveDDChandanaNews #DDChandanaNews #DDChandana #DDKannada
Ещё видео!